ಬೆಂಗಳೂರು : ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಕೊರೊನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ.
ಇಂದು ಎಲ್ಲ ಕೊರೊನಾ ಪೀಡಿತ ಹತ್ತು ರಾಜ್ಯಗಳ ಸಿಎಂಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅಗತ್ಯ ಎಂದು ಪ್ರಧಾನಿ ಮೋದಿ ಹೇಳಿದರು.

ಬೇಡಿಕೆ ಹೆಚ್ಚಿದ ಹಿನ್ನಲೆ ಆಮ್ಲಜನಕದ ದುರ್ಬಳಕೆಯಾಗಬಹುದು, ಹೀಗೆ ಆಮ್ಲಜನಕ ದುರ್ಬಳಕೆಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸಬೇಕು ಮತ್ತು ಆಮ್ಲಜನಕದ ಟ್ಯಾಂಕರಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಮೋದಿ ತಿಳಿಸಿದರು.
ಆಮ್ಲಜನಕ ಪೂರೈಕೆಗೆ ಬಿಎಸ್ವೈ ಮನವಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು. ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಬಿಎಸ್ವೈ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ. 16 ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.