ಬೆಂಗಳೂರು : ರಾಜ್ಯ ಸರ್ಕಾರಗಳು ಸಿದ್ದವಾಗಿದಿಯೇ ಇಲ್ವೆ ಅನ್ನೊದು ಪರಿಶೀಲಿಸದೇ ಮೆ1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ಘೋಷಿಸಿದ ಮಾತಿನ ಶೂರ ಎಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ವತಿಯಿಂದ ವ್ಯವಸ್ಥೆಗೊಳಿಸಿರುವ ಸಹಾಯವಾಣಿ ಹಾಗೂ ಆಂಬುಲೆನ್ಸ್ ಸೇವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವ್ಯಾಕ್ಸಿನ್ ಕೊರತೆಯಿಂದ ರಾಜ್ಯದ ಬಿಜೆಪಿ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮುಂದೂಡಿದೆ, ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ ಕಾಣಿಸಿಕೊಂಡು ನಿಜಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಲಸಿಕೆ ಪಡೆದುಕೊಳ್ಳಲು ಆನ್ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್ಲೈನ್ ನೋಂದಣಿ ಕಷ್ಟದ ಕೆಲಸ, ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಬೇಕು ಎಂದು ಹೇಳಿದರು.
ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು. ಸರ್ಕಾರದ ಮುಖ್ಯಕಾರ್ಯದರ್ಶಿ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು ಎಂದು ಅಭಿಪ್ರಾಯ ಪಟ್ಟರು.

ರಾಜ್ಯ ಕಾಂಗ್ರೆಸ್ ಪಕ್ಷ ಬಡರೋಗಿಗಳ ಸೇವೆಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿದ್ದು ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದ್ದು, ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು ಎಂದು ಮನವಿ ಮಾಡಿದರು.