ಬೆಂಗಳೂರು: ಇಂದಿನಿಂದ ಜುಲೈ 15ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮಳೆಯಾಗಲಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಗಾಳಿ, ಗುಡುಗುಸಹಿತ ಅತ್ಯಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರಿಕೆಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ ಎಂದು ವಿವರಿಸಿದೆ. ಈಗಾಗಲೇ ಬಂದರು ಪ್ರದೇಶದಲ್ಲಿ ಜಿಲ್ಲಾಡಳಿತ ಮೈಕ್ ಮೂಲಕ ಎಚ್ಚರಿಕೆಯ ಸಂದೇಶ ಅನೌನ್ಸ್ ಮಾಡಲಾಗುತ್ತಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.11ರಂದು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು.12 ಮತ್ತು 13ರಂದು `ರೆಡ್ ಅಲರ್ಟ್’ ನೀಡಲಾಗಿದೆ. ಮಳೆ ಹಿನ್ನೆಲೆ ಕೊಡಗು, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭೂಕುಸಿತ, ಪ್ರವಾಹದ ಆತಂಕ ಉಂಟಾಗಿದ್ದು, ಜಿಲ್ಲಾಡಳಿತ ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧವಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಲಕ್ಷಣ ಕಂಡು ಬಂದಿದೆ. ಜು.11ರ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅರ್ಭಟ ತುಸು ಕಡಿಮೆ ಆಗಲಿದೆ. ಈ ಭಾಗದ ಮೂರು ಜಿಲ್ಲೆಗಳ ಕೆಲವೆಡೆ 12 ಸೆಂ.ಮೀ.ಗಿಂತ ಹೆಚ್ಚು ಮಳೆ ಬೀಳಲಿದ್ದು, ಜು.12ರಿಂದ 14ರವರೆಗೆ `ಆರೆಂಜ್ ಅಲರ್ಟ್’ ನೀಡಲಾಗಿದೆ.