ಬೆಂಗಳೂರು (ಸೆ.೩): ಶಿಕ್ಷಣ ಮುಗಿದು ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸರ್ಕಾರ ಉದ್ಯೋಗವಕಾಶ ಕೊಡುತ್ತಿದೆ.
ಯುವಜನರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವೂ ಸಿಗುವ ಹಾಗೆ ಮಾಡುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಅವರು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಉದ್ಯೋಗಗಳಿಗೆ ಕೊರತೆ ಇಲ್ಲ, ವಿಪುಲ ಉದ್ಯೋಗಾವಕಾಶಗಳು ಲಭ್ಯವಿವೆ.. ಕೆಲಸ ಮಾಡಲು ಯುವಜನರು ಮುಂದೆ ಬರಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕುಶಲ ಸಂಪನ್ಮೂಲ ಒದಗಿಸುವುದು ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ಎಷ್ಟೇ ಪ್ರಮಾಣದ ಉದ್ಯೋಗಾಂಕ್ಷಿಗಳು ಬಂದರೂ ಸೂಕ್ತ ತರಬೇತಿ, ಭಾಷಾ ಜ್ಞಾನ, ಕೌಶಲ್ಯ ಕಲಿಸಿ ಕೆಲಸ ಕೊಡಿಸಲಾಗುವುದು ಎಂದು ಹೇಳಿದ್ರು. ಒಂದು ವೇಳೆ ವಿದೇಶಗಳಲ್ಲಿ ಕೆಲಸ ಮಾಡುತ್ತೇವೆ ಅಂದ್ರೂ ಅದಕ್ಕೂ ನಮ್ಮಲ್ಲಿ ಅವಕಾಶವಿದೆ. ರಾಜ್ಯದ ಕುಶಲ ಯುವಜನರಿಗೆ ಹೊರ ದೇಶಗಳಲ್ಲೂ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕರು ಉದ್ಯೋಗ ಪಡೆದುಕೊಂಡು ವಿವಿಧ ದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆಂದು ಸಚಿವರು ಹೇಳಿದರು.

ಈ ಉದ್ಯೋಗ ಮೇಳದಲ್ಲಿ 2,000ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ ಇವೆ. ಆದರೆ ನೋಂದಣಿ ಮಾಡಿಕೊಂಡಿರುವುದು 1300 ಜನ. 30 ಕಂಪನಿಗಳು ನೇರವಾಗಿ, ಅಂದರೆ ಭೌತಿಕವಾಗಿ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಆಯ್ಕೆ ಮಾಡಿಕೊಳ್ಳುತ್ತಿವೆ. ಇನ್ನೂ 12 ಕಂಪನಿಗಳು ಆನ್ ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಒಟ್ಟು 42 ಕಂಪನಿಗಳು ಈ ಮೇಳದಲ್ಲಿ ಭಾಗಿಯಾಗಿವೆ ಎಂದು ಹೇಳಿದರು.

ಇವೆಲ್ಲ ದೇಶದ ಪ್ರತಿಷ್ಟಿತ ಕಂಪನಿಗಳಾಗಿದ್ದು, ನಮ್ಮ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿವೆ. ಇಂಥ ಕಂಪನಿಗಳಲ್ಲಿ ಅವಕಾಶ ಸಿಕ್ಕಿದ ಮೇಲೆ ಉತ್ತಮವಾಗಿ ಕೆಲಸ ಮಾಡಿ ಹಾಗೂ ನೀವು ಬೆಳೆಯುವುದರ ಜತೆಗೆ ಕಂಪನಿಯನ್ನೂ ಬೆಳೆಸಿ ಆ ಮೂಲಕ ಆರ್ಥಿಕ ವೃದ್ಧಿಗೆ ಕಾಣಿಕೆ ನೀಡಿ ಎಂದು ಸಚಿವರು ಉದ್ಯೋಗಾಂಕ್ಷಿಗಳಿಗೆ ಕರೆ ನೀಡಿದರು.