ಬೆಂಗಳೂರು : ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪ ಚುನಾವಣೆ (Karnataka By Election ) ಘೋಷಣೆ ಹಿನ್ನಲೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಈ ಬಾರಿ ಎರಡು ಕ್ಷೇತ್ರಗಳಲೂ ಅಲ್ಪ ಅಸಂಖ್ಯಾತ ಸಮುದಾಯದ ಅಭ್ಯರ್ಥಿಗಳನ್ನು ಕಣಕಿಳಿಸಲು ತಿರ್ಮಾನಿಸಿದ್ದು ಹಾನಗಲ್ನಿಂದ ನಿಯಾಜ್ ಶೇಖ್, ಸಿಂಧಗಿ ಕ್ಷೇತ್ರದಿಂದ ನಾಜಿಯಾ ಶಕೀಲಾ ಅಂಗಡಿ ಹೆಸರು ಅಂತಿಮಗೊಳಿಸಲಾಗಿದೆ.
ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಇದಕ್ಕೂ ಮೊದಲು ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ Be, M tech ಪದವೀಧರರಾಗಿರುವ ನಿಯಾಜ್ ಶೇಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲ್ಲಿಸಿಕೊಡಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಕೋರಿದ್ದಾರೆ.
ರಾಜ್ಯದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದಾಗಿ ಹಾವೇರಿಯ ಹಾನಗಲ್ ಮತ್ತು ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ಸಿಂದಗಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.