ಬೆಂಗಳೂರು: (ನ.26): Constitution Day :ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂಬ ಹೆಮ್ಮೆಯನ್ನು ನಮಗೆ ತಂದುಕೊಟ್ಟಿರುವುದು ನಮ್ಮ ಸಂವಿಧಾನ. ಧರ್ಮನಿರಪೇಕ್ಷತೆ, ಪ್ರಜಾಸತ್ತಾತ್ಮಕ ಮತ್ತು ಗಣತಂತ್ರ ಎಂಬ ಮಂತ್ರಗಳ ನಮ್ಮ ಸಂವಿಧಾನದ ಆಧಾರ ಸ್ತಂಭಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಸಂವಿಧಾನ ದಿನವಾದ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭಾರತ ಸಂವಿಧಾನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂಬ ಹೆಮ್ಮೆಯನ್ನು ನಮಗೆ ತಂದುಕೊಟ್ಟಿರುವುದು ನಮ್ಮ ಸಂವಿಧಾನ. ಧರ್ಮನಿರಪೇಕ್ಷತೆ, ಪ್ರಜಾಸತ್ತಾತ್ಮಕ ಮತ್ತು ಗಣತಂತ್ರ ಎಂಬ ಮಂತ್ರಗಳ ನಮ್ಮ ಸಂವಿಧಾನದ ಆಧಾರ ಸ್ತಂಭಗಳಾಗಿವೆ.
ಒಬ್ಬ ವ್ಯಕ್ತಿಗೆ ಒಂದು ಮತ:
ಭಾರತ ಸಂವಿಧಾನವು ಸಮಾನತೆಯನ್ನು ಸಾರಿ ಹೇಳಿದೆ. ಯಾವುದೇ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗಿಂತ ಮೇಲೂ ಅಲ್ಲ ಕೀಳೂ ಅಲ್ಲ. ಹಾಗಾಗಿಯೇ ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವವನ್ನು ಅಳವಡಿಸಲಾಗಿದೆ. ಸಂವಿಧಾನದ ಇಂತಹ ಎಲ್ಲ ಆಶಯಗಳನ್ನು ಎತ್ತಿಹಿಡಿಯುವುದು ಇಂದು ನಮ್ಮೆಲ್ಲರ ಮುಂದಿರುವ ಜವಾಬ್ದಾರಿ ಮತ್ತು ಹೊಣೆಗಾರಿಕೆಯಾಗಿದೆ.
ಅಂಬೇಡ್ಕರ್ ಅವರು ತಾವೇ ರಚಿಸಿರುವ ಸಂವಿಧಾನದ ಬುನಾದಿ ಮೇಲೆ ಭವಿಷ್ಯದ ಭಾರತವನ್ನು ನಿರ್ಮಾಣಮಾಡಲು ಬಯಸಿದ್ದರು. ಆದರೆ ಸಂವಿಧಾನವನ್ನು ಮನ:ಪೂರ್ವಕವಾಗಿ ಒಪ್ಪದೆ ಇದ್ದ ಹಿಂದೂ ಧರ್ಮದೊಳಗಿದ್ದ ಒಂದು ವರ್ಗ ಮನುಸ್ಮೃತಿ ಆಧಾರದಲ್ಲಿ ಸಮಾಜವನ್ನು ನಿರ್ಮಾಣ ಮಾಡಲು ಹೊರಟಿರುವುದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿಯೇ ಅವರು ಹಿಂದೂಧರ್ಮವನ್ನು ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಿದರು.

ಇದನ್ನೂ ಓದಿ:Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ”
ಸಂವಿಧಾನದ ಮೇಲೆ ಗೌರವಿಲ್ಲ:
ಹಿಂದೂ ಧರ್ಮದೊಳಗಿರುವ ರೋಗಗ್ರಸ್ತ ಮನಸ್ಸುಗಳಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಹೆಚ್ಚು ಪ್ರಿಯವೆನಿಸಿದೆ. ಅದು ಸಾರಿರುವ ಜಾತಿ ವ್ಯವಸ್ಥೆಯ ಬುಡ ಭದ್ರಪಡಿಸುವ ಕೆಲಸವನ್ನು ಈ ವರ್ಗ ಗುಟ್ಟಾಗಿ ಮಾಡುತ್ತಿದೆ.
ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ದೇಶದ ಪ್ರಧಾನಿಯಾಗಲಿ, ಅವರ ಪಕ್ಷವಾಗಲಿ ಬಾಯಿಮಾತಿಗಾದರೂ ಸಚಿವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸುವುದಿಲ್ಲಎಂದರು.
ಇಂತಹವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ ಹಾಗೂ ಸಾರುವ ಆಶಯಗಳ ಮೇಲೆ ನಂಬಿಕೆ ಇಲ್ಲ. ಸಾಮಾಜಿಕ ನ್ಯಾಯದ ಸಿದ್ಧಾಂತ, ಜಾತಿನಾಶ, ಅಸ್ಪೃಶ್ಯತೆಯ ನಿರ್ಮೂಲನೆ ಯಾವುದೂ ಅವರಿಗೆ ಬೇಕಾಗಿಲ್ಲ. ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವ ಯಥಾಸ್ಥಿತಿವಾದಿಗಳು.
ಇಂದು ರಾಷ್ಟ್ರೀಯತೆ ಎಂಬ ಪದ ಹಲವು ವಾದ-ವಿವಾದಗಳು, ಚರ್ಚೆಗಳನ್ನು ಹುಟ್ಟುಹಾಕಿದೆ. ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳೇ ರಾಷ್ಟ್ರೀಯತೆ ಎಂಬಂತೆ ಬಿಂಬಿಸಲಾಗುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ.
ಪ್ರತಿಯೊಬ್ಬರಿಗೂ ಧರ್ಮದ ಹಕ್ಕುಇದೆ:
ಧರ್ಮನಿರಪೇಕ್ಷತೆ ಸಂವಿಧಾನದ ಮೂಲ ಆಶಯಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಇಷ್ಟವಾದ ಧರ್ಮವನ್ನು ಆಚರಿಸುವ, ಅನುಸರಿಸುವ ಪಾಲಿಸುವ ಹಕ್ಕು ನೀಡಿದೆ. ರಾಜಕಾರಣ ಮತ್ತು ಶಿಕ್ಷಣದಲ್ಲಿ ಧರ್ಮ ಇಣುಕಬಾರದು ಎಂಬುದು ಧರ್ಮನಿರಪೇಕ್ಷತೆಯ ಆಶಯವೂ ಹೌದು. ಭಾರತ ಸಂವಿಧಾನದ ಮೂಲ ಆಶಯವೂ ಇದಾಗಿದೆ. ಸಂವಿಧಾನ ವಿಜ್ಞಾನವನ್ನು ಪ್ರತಿಪಾದಿಸುತ್ತದೆ ಮೂಢನಂಬಿಕೆಯನ್ನಲ್ಲ.
ಭಾರತ ಹಲವು ವೈವಿಧ್ಯತೆ, ಆಚಾರ, ವಿಚಾರ, ಸಂಸ್ಕೃತಿಗಳನ್ನು ತನ್ನ ಉದರದಲ್ಲಿ ಕಾಪಿಟ್ಟುಕೊಂಡಿದೆ. ಇಂತಹ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಮುನ್ನಡೆಯಲು ನಾವು ಮತ್ತೊಮ್ಮೆ ಸಂಕಲ್ಪ ಮಾಡಬೇಕಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಸಂವಿಧಾನ ನಮಗೆ ನೀಡಿರುವ ಮತ್ತೊಂದು ಮಹತ್ವದ ಕೊಡುಗೆ. ಮಾನವ ಬೆಳವಣಿಗೆಯ ಇತಿಹಾಸದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯುನ್ನತ ಘಟ್ಟ. ನಮ್ಮ ಸಂವಿಧಾನ ಇದನ್ನು ಯಾವುದೇ ಧರ್ಮ, ಜಾತಿ, ಲಿಂಗ ತಾರತಮ್ಯವಿಲ್ಲದೆ ಕಲ್ಪಿಸಿದೆ. ಈ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈಗ ನಮ್ಮ ಮುಂದಿರುವ ಸವಾಲಾಗಿದೆ.

ಇದನ್ನೂ ಓದಿ:Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ”
ರಾಜಕೀಯ ಸ್ವತಂತ್ರ್ಯ ಶಾಶ್ವತವಲ್ಲ
ಸ್ವಾತಂತ್ರ್ಯಕ್ಕಿಂತಲೂ ಮೊದಲು ಸಮಾನತೆ ಸ್ಥಾಪನೆಯಾಗಬೇಕು ಎಂದು ಅಂಬೇಡ್ಕರ್ ಬಯಸಿದ್ದರು. ನಾವು ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ತೃಪ್ತರಾಗಬಾರದು, ರಾಜಕೀಯ ಪ್ರಜಾತಂತ್ರವನ್ನು ಸಾಮಾಜಿಕ ಪ್ರಜಾತಂತ್ರವನ್ನಾಗಿ ಮಾಡಬೇಕು. ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ಇದ್ದರೆ ರಾಜಕೀಯ ಪ್ರಜಾತಂತ್ರ ಯಶಸ್ಸು ಕಾಣಲಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು.
ಭಾರತದಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಸುಧಾರಿಸದೆ ಆರ್ಥಿಕ ಸುಧಾರಣೆ ತರಲು ಹೇಗೆ ಸಾಧ್ಯ? ಎಂದು ಡಾ. ಅಂಬೇಡ್ಕರ್ ಕೇಳಿದ್ದರು. ಜಾತಿ ವ್ಯವಸ್ಥೆಯಂತಹ ಭೀಕರ ಸಾಮಾಜಿಕ ರೋಗಕ್ಕೆ ಬಲಿಯಾಗಿರುವ ಭಾರತದ ಅಭಿವೃದ್ದಿ ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಸಾಧ್ಯ ಇಲ್ಲ ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಈ ಅಭಿಪ್ರಾಯವೇ ಅಂಬೇಡ್ಕರ್ ಮತ್ತು ಗಾಂಧೀಜಿ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು.
ಉಳ್ಳವರ ಕೈಗೆ ರಾಜಕೀಯ ಅಧಿಕಾರವನ್ನು ನೀಡುವುದರಿಂದ ಬಡವರು, ಜಾತಿ ವ್ಯವಸ್ಥೆಗೆ ಬಲಿಯಾದ ಶೋಷಿತರು ಇನ್ನಷ್ಟು ಅನ್ಯಾಯ ಶೋಷಣೆಗೊಳಗಾಗುತ್ತಾರೆ. ಇದನ್ನು ತಪ್ಪಿಸಬೇಕಾದರೆ ಮೊದಲು ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆದುಕೊಂಡು ಸಾಮಾಜಿಕ ಮತ್ತುಆರ್ಥಿಕ ಸಮಾನತೆಯನ್ನು ಸಾಧಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯವನ್ನು ನಿವಾರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ.
ಇವರಿಬ್ಬರೂ ಸಮಾನತೆಯ ಹರಿಕಾರರು:
ಬಸವಣ್ಣ ಮತ್ತು ಅಂಬೇಡ್ಕರ್ ವೈಯಕ್ತಿಕವಾಗಿ ನನಗೆ ಜ್ಞಾನಗುರುಗಳು, ನಾನು ಬಸವ ಜಯಂತಿಯ ದಿನವೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು. ಸಂವಿಧಾನದ ಆಶಯಗಳನ್ನು ಜಾರಿಗೆತರುವುದೆಂದರೆ ಅಂಬೇಡ್ಕರ್ ಆಶಯಗಳನ್ನು ಜಾರಿಗೆ ತಂದ ಹಾಗೆ.
ಅದೇರೀತಿ ಅಂಬೇಡ್ಕರ್ ಆಶಯಗಳನ್ನು ಜಾರಿಗೆತರುವುದೆಂದರೆ ಅದು ಬಸವಣ್ಣನ ಚಿಂತನೆಗಳನ್ನು ಜಾರಿಗೆ ತಂದ ಹಾಗೆ. ಬಸವಣ್ಣ ಮತ್ತು ಅಂಬೇಡ್ಕರ್ ಸಿದ್ಧಾಂತಗಳ ನಡುವೆ ಹಲವಾರು ಬಗೆಯ ಸಾಮ್ಯತೆಗಳನ್ನು ಕಂಡುಕೊಳ್ಳಲು ಸಾಧ್ಯ. ಬಸವಣ್ಣನವರು ಕಟ್ಟಿ ಬೆಳೆಸಿದ ಅನುಭವ ಮಂಟಪಕ್ಕೂ, ಅಂಬೇಡ್ಕರ್ ಸಂವಿಧಾನದ ಮೂಲಕ ನೀಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗೂ ಸಾಮ್ಯತೆಗಳಿವೆ. ಇಬ್ಬರ ದೃಷ್ಟಿಯಲ್ಲಿಯೂ ಸಾಮಾನ್ಯ ಜನರೇ ಪ್ರಭುಗಳೂ. ಇಬ್ಬರೂ ಜಾತಿ-ಮತ ಮೀರಿದ ಸಮಾನತೆಯ ಹರಿಕಾರರು.
ಬಸವಣ್ಣನವರು ಹಾಗೂ ಅಂಬೇಡ್ಕರ್ ಅವರೂ ಸಮಾಜದ ಪಿಡುಗುಗಳಾದ ವರ್ಣ ವ್ಯವಸ್ಥೇ, ಜಾತಿತಾರತಮ್ಯ ಮತ್ತು ವೈದಿಕಷಾಹಿಯನ್ನು ವಿರೋದಿಸಿದ್ದರು. ಕೋಮುವಾದ, ಜಾತಿತಾರತಮ್ಯ. ಮೂಢ ನಂಬಿಕೆ, ಕಂದಾಚಾರ ಮೊದಲಾದ ಸಾಮಾಜಿಕ ಪಿಡುಗುಗಳೆಲ್ಲ ಮತ್ತೆ ತಲೆಎತ್ತಲು ಪ್ರಯತ್ನಿಸುತ್ತಿರುವ ಈ ಹೊತ್ತಿನಲ್ಲಿ ಅದರ ವಿರುದ್ಧದ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದವರ ತತ್ವ-ಸಿದ್ಧಾಂತಗಳು.
ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಸಂವಿಧಾನದ ಒಳಾರ್ಥವನ್ನು ತಿಳಿಸಿದ್ದಾರೆ.