ಬೆಂಗಳೂರು: (ಫೆ.22) Bike Theft: ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪಶ್ಚಿಮ ವಿಭಾಗದ ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟಸ್ವಾಮಿ (38) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿಯಿಂದ 6.70 ಲಕ್ಷ ರೂ ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಂಧನದಿಂದ ಕೆಂಗೇರಿ, ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತು ಜ್ಞಾಾನಭಾರತಿ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಆರೋಪಿ ಇತ್ತೀಚೆಗೆ ಕೆಂಗೇರಿ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅದನ್ನು ಗಮನಿಸಿದ್ದ ಗಸ್ತು ಪೊಲೀಸರು ಆನುಮಾನದ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಮಾರಾಟ
ವಿಚಾರಣೆ ವೇಳೆ ಆರೋಪಿ, ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದನ್ನು ಬಾಯಿ ಬಿಟ್ಟಿದ್ದಾನೆ. ಬಳಿಕ ಆಂಧ್ರಪ್ರದೇಶದ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಹಕರನ್ನು ಹುಡುಕಿ 5 ರಿಂದ 10 ಸಾವಿರ ರೂಗೆ ಮಾರಾಟ ಮಾಡುತ್ತಿದ್ದ ಎಂಬುದು ತಿಳಿದಿದೆ. ವಾಹನಗಳ ದಾಖಲೆ ಕೇಳಿದಾಗ, ಮತ್ತೊಮ್ಮೆ ತಂದು ಕೊಡುವುದಾಗಿ ಹೇಳಿ ಪರಾರಿಯಾಗುತ್ತಿದ್ದ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡಿ ಜೀವನ ನಡೆಸುತ್ತಿದ್ದ ಎಂದು ವಿಚಾರಣೆ ವೇಳೆ ಗೊತ್ತಾಗಿದೆ.
ಈತನ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.