ಬೆಂಗಳೂರು(ನ.26): ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ರಾಜ್ಯಗಳನ್ನು ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು ಎಂದು ಹೇಳಿದ್ದಾರೆ. ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕಾನೂನಾತ್ಮಕ ಹೋರಾಟ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ. ಇನ್ನೂ ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.