ಬೆಂಗಳೂರು(ಡಿ.3): ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಚಿರತೆ ದಾಳಿ ಕುರಿತು ಸಿಎಂ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ಕಾಡಿಗೆ ಬಿಡಲು ಇಲಾಖೆಗೆ ಸೂಚನೆ
ಕಳೆದ ಹಲವಾರು ದಿನಗಳಿಂದ ಚಿರತೆಯು ಬೇಟೆಯಾಡಲು ಪ್ರಯತ್ನ ಮಾಡುತ್ತಿದ್ದು, ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಚಿರತೆ ದಾಳಿ ತಡೆಗೆ ವಿಶೇಷ ತಂಡ
ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳಿವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದು ಮಾಹಿತಿ ನೀಡಿದ್ದಾರೆ.